ವಿಷಯಕ್ಕೆ ಹೋಗಿ

ಸಂಬಂಧ ಬೇರೂರುವ ಮುನ್ನ


ಒಂದೇ ಗರ್ಭದಲ್ಲಿ ಮೊಳಕೆಯೊಡೆದವರಲ್ಲ, ಕೂಡಿಬೆಳೆದವರಲ್ಲ, ಒಬ್ಬರಿಗೊಬ್ಬರು ಪರಿಚಯವಿಲ್ಲ. ಆದರೆ ಕಾಣದೆ ಇರುವ ವಿಧಿಯ ಹೆಸರಿನಲ್ಲಿ ಪರಸ್ಪರ ಸಂಧಿಸುವ ಮಾಗಿಯ ಕಾಲ ಬರುತ್ತದೆ. ಅವರ್ಯಾರೋ? ಇವರ್ಯಾರೋ? ಆಸೆಗಳು ವಿಭಿನ್ನ, ಗುರಿಯಂತೂ ಉತ್ತರಾಯಣ ದಕ್ಷಿಣಾಯನ.
ನಸುನಗುವಿನಿಂದ ಕಸಿ ಕಟ್ಟುವ ಸ್ನೇಹ ಹೃದಯದಲ್ಲಿ ಬೇರನ್ನು ಬಿಟ್ಟು ಸಾಯುವವರೆಗೂ ನೆನಪಿನ ಫಲ ನೀಡುತ್ತದೆ. ಸತ್ತರೂ ಅದು ಅಮರವಾಗಿ ನಮ್ಮ ಆತ್ಮೀಯರ ಬಾಯಲ್ಲಿ ಪದವಾಗಿ ಹೊಮ್ಮುತ್ತದೆ. ಒಂದು ಸಣ್ಣ ಖುಷಿಗಾಗಿ ಗುಟುಕಿಸಿದ ಶುಗರ್‍ಲೆಸ್ ಟಿ ನಮ್ಮ ಬಾಳಿನ ತುಂಬಾ ಸಿಹಿಸಕ್ಕರೆಯಂತಾ ಅನುಭವವನ್ನು ತಂದೊಡ್ಡುತ್ತದೆ.
ಗೆಳತನಕ್ಕೆ ಗಂಟು ಬಿದ್ದಾಗ ಹಸಿಮನಸ್ಸು ಅಂಟಿಕೊಂಡು ಮನೆಯವರ ನೆನಪು ಮರೆಯುವಂತೆ ಕುಳಿತ ಕಲ್ಲಿನಬೆಂಚಿಗೂ ಬೇಸರವಾಗುವಂತೆ ಅಲ್ಲಿ ಲೋಕಾಭಿರಾಮದ ಮಾತು ತುಂಬಾ ಅಪಾಯ್ಯಮಾನವಾಗಿರುತ್ತದೆ. ಅಲ್ಲಿ ಆಡಿದ ಮಾತು, ಮಾಡಿದ ಜಗಳ, ಬೇಸರವಾದಾಗ ನೆನಪಿನ ಅಂಗಳಕ್ಕೆ ತಂದಾಗ ತುಟಿಗಳು ತನ್ನಷ್ಟಕ್ಕಕ್ಕೆ ತಾನೇ ನಸುನಗುತ್ತವೆ. ತಪ್ಪಲ್ಲದ ತಪ್ಪಿಗೆ ಕಾಲು ಕೆರೆದುಕೊಂಡು ಮಗುವಿನಂತೆ ರಚ್ಚೆ ಹಿಡಿದು ಹುಸಿಮುನಿಸು ತೋರುವ ಮುಖದಲ್ಲಿ ಯಾವ ಲಜ್ಜೆಯೂ ಇಲ್ಲದೆ ಪುಟ್ಟ ಮಗುವಿನಂತೆ ನಗುವೊಂದು ಪುಟಿಯುತ್ತದೆ ಮೆಲ್ಲಗೆ.
ಹಗಲುರಾತ್ರಿಯೆಲ್ಲಾ ಮೇಸೆಜ್ ಮೂಲಕ ತಮ್ಮ ಮನಸ್ಸಿನ ಭಾವನೆಗಳನ್ನು ಹಂಚಿಕೊಳ್ಳುತ್ತಾ, ಆಪ್ತರಾಗುವ ಕ್ರಿಯೆ ನೋಡನೋಡವಷ್ಟರಲ್ಲಿ ಗಾಡವಾದ ಸಂಬಂಧ ಬೆಳದು ಆಲದಮರದ ಬಿಳಲಿನಂತೆ ವಿಶಾಲವಾಗಿ ಕನಸಿನ ಲೋಕಕ್ಕೆ ತೇಲುತ್ತಾರೆ. ಅಲ್ಲಿ ನೋವಿಗೂ ಒಂದಷ್ಟು ಜಾಗವಿದೆ. ಕಣ್ಣಲ್ಲಿ ಕಂಬನಿ ಹನಿಯೊಡೆಯುವ ಭಾವುಕ ಮಾತು, ಅದಕ್ಕೆ ಉತ್ತರ ಕೊಡದ ನೀರ್ಲಿಪ್ತತೆ, ನಿರ್ಭಾವುಕ ಮನಸ್ಸಿಗೆ ತುಸು ಹುಳಿ ಹಿಂಡಿದಂತಾಗುತ್ತದೆ. ದಿನದ ವೇಳಾಪಟ್ಟಿ ಅದಲು ಬದಲಾಗಿ ಹಸಿವಿನ ಚಿಂತೆ ಇಲ್ಲದೆ ಬರೀ ಮಾತಿನ ಕಂತೆಗೆ ಹಾತೊರೆಯುತ್ತದೆ.
ಇನ್ನೇನೂ ಮತ್ತಷ್ಟು ಆತ್ಮೀಯರಾಗುವ ಹೊತ್ತಿಗೆ ಅದೇ ಕಾಣದ ವಿಧಿಯೊಂದು ಆ ಸಂಬಂಧಗಳಿಗೆ ಭವಿಷ್ಯ ಎಂಬ ಅಡ್ಡಗಾಲು ಹಾಕಿಬಿಡುತ್ತದೆ. ಅಗಲಿಕೆಯಂಬ ಶಬ್ದ ಕೇಳಿ ಮನವು ಮಡುಗಟ್ಟಿ ದುಃಖದಿಂದ ನರ್ತಿಸತೊಡಗುತ್ತದೆ. ಎದೆಯ ತುಂಬಾ ಏಕಾಂಗಿತನದ ಜಿಡ್ಡುಹಿಡಿಯಲು ಆರಂಭವಾಗುತ್ತದೆ. ಆ ಒಂದೆರಡು ದಿನದ ನೋವು ಹೆಪ್ಪುಗಟ್ಟಿ ಮೃದುವಾದ ಹೃದಯದ ತುಂಬೆಲ್ಲಾ ಗೀರಿದಂತಾಗುತ್ತದೆ. ಮೂರನೇ ದಿನ ಆಕಸ್ಮಿಕವಾಗಿಯೋ ಅಥವಾ ಅನಿವಾರ್ಯವೋ ಮೊಬೈಲ್ ನಾಟ್ ರಿಚಬಲ್ ಆಗಿರುತ್ತೆ. ಮತ್ತೆ ಅಲ್ಲಿಗೆ ಅವರ್ಯಾರೋ? ಇವರ್ಯಾರೋ...? ಆದರೆ ನೆನಪುಗಳು ಮಾತ್ರ ಅವರವರದೇ...!

ಲೇಖನ : ಸಂಗಮೇಶ ಡಿಗ್ಗಿ
8553550012

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಮಾನವ ಘನತೆಯ ಪ್ರತಿಪಾದಕ: ಬಿಜವಾಡ ವಿಲ್ಸನ್

 ಮಲಹೊರುವ ಪದ್ದತಿ ತನ್ನ ಕುಲ ಕಸುಬು ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಮುಂದಾಗಿದ್ದ ಯುವಕನೋರ್ವ ತನ್ನ ದೃಡ ನಿರ್ಧಾರದಿಂದ ದೇಶಾದ್ಯಂತ ಮಲ ಹೊರುವ ಅಮಾನವೀಯ ಪದ್ಧತಿ ವಿರುದ್ಧ ಜನಾಂದೋಲನ ರೂಪಿಸಿ ಮಾನವ ಘನತೆಯ ಬದುಕು (ಡಿಗ್ನಿಟಿ ಆಪ್ ಲೈಪ್)ನ್ನು ತನ್ನ ಹೋರಾಟದ ಮೂಲಕ ಎತ್ತಿ ಹಿಡಿದ ಉದ್ದೇಶಕ್ಕಾಗಿ 2016ನೇ ಸಾಲಿನ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ ಲಭಿಸಿದೆ. ಅವರ ಹೆಸರು ಕೋಲಾರ ಜಿಲ್ಲೆಯ ಕೆಜಿಎಪ್ ಮೂಲದ ಬಿಜವಾಡ ವಿಲ್ಸನ್. ಆಂದ್ರದ ಓಂಗೋಲ್ ಜಿಲ್ಲೆಯ ಕಂಬಾಲದೇನು ಗ್ರಾಮದ ಬಿಜವಾಡ ಜಾಕೋಬ್ ಎಂಬುವವರು 1935ರ ಸಂದರ್ಭದಲ್ಲಿ ಕೆಜಿಎಪ್‌ಗೆ ಆಗಮಿಸಿ ಇಲ್ಲಿನ ಬಿಜಿಎಂಎಲ್ ಕಾರ್ಖಾನೆಯಲ್ಲಿ ಪೌರಕಾರ್ಮಿಕರಾಗಿ ಕೆಲಸಕ್ಕೆ ಸೇರಿಕೊಳ್ಳುತ್ತಾರೆ. 1966ರಲ್ಲಿ ವಿಲ್ಸನ್ ಜನಿಸಿದರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ನೆರೆಯ ಕುಪ್ಪಂನಲ್ಲಿ ನೆರವೇರಿಸಿದ ವಿಲ್ಸನ್ ಕೆಜಿಎಪ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ತದಂತರ ಹೈದರಾಬಾದ್ ವಿವಿಯಲ್ಲಿ ರಾಜಕೀಯ ಶಾಸದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಲಹೊರುವ ಕುಲ ಕಸುಬು ತನ್ನ ಕೊನೆಯ ಮಗನಿಗೆ ತಟ್ಟದಿರಲಿ ಎಂಬ ಕಾರಣಕ್ಕೆ ವಿಲ್ಸನ್ ಅವರನ್ನು ಕುಪ್ಪಂನ ವಿದ್ಯಾರ್ಥಿ ನಿಲಯದಲ್ಲಿ ಸೇರಿಸಿ ಶಿಕ್ಷಣ ಕೊಡಿಸಿದ್ದೇ ಪಾಲಕರ ಮಹತ್ಸಾಧನೆಯಾಗಿತ್ತು. ಮಲ ಹೊರುವ ಸಮುದಾಯದವ ಎಂಬ ಕಾರಣಕ್ಕೆ ಸಹ ಪಾಠಿಗಳಿಂದ ಅವಮಾನಕೊಳಗಾಗಿದ್ದ ವಿಲ್ಸನ್ ಇದಕ್ಕೆ ಕಾರಣ ಹುಡುಕಲು ಹೊರಟಾಗ ಪಾಲಕರು ಸತ್ಯ ಮರೆಮ...

ಮೊಸರು ಮಾರುವ ಹುಡುಗನ ಸೈಕಲ್ ಮತ್ತು ಪ್ಲಾಶ್‍ಬ್ಯಾಕ್ ನೆನಪು

‘ಕಾಲನ ಕೈಗೆ ದೇವರು ಸೃಷ್ಟಿ ಮಾಡಿದ ಜಗತ್ತು ಉಳಿಯುವದಿಲ್ಲವೆಂದ ಮೇಲೆ ನಾವು ಯಾವ ಲೆಕ್ಕ’ ಏಲ್ಲೋ ಓದಿದ ಅಣಿಮುತ್ತು ಮೊನ್ನೆ ದುತ್ತನೆ ಮೆದುಳಿನಲ್ಲಿ ಗುಂಗಿ ಹುಳದಂತೆ ಕಾಡತೊಡಗಿತು. ಕಾರಣವಿಷ್ಟೇ, ಎಮ್.ಎ ಮುಗಿಯುವ ಸಮಯವೂ ಹೌದು, ಅದಕ್ಕಿಂತ ಮುಖ್ಯವಾಗಿ “ಆನಂದಮಾರ್ಗ ಆಶ್ರಮ” ತೊರೆಯಬೇಕಲ್ಲ ಎನ್ನುವ ನೋವು. ಆ ನೋವಿಗೆ ಕಾರಣವಾದವನು ದಿನಾಲೂ ಗಟ್ಟಿ ಕೆನೆ ‘ಮೊಸರು ಮಾರುವ ಹುಡುಗ’ ಮತ್ತು ಆತನ ‘ಸೈಕಲ್’. ಆ ಹುಡುಗ 7ನೇ ತರಗತಿ. ಯಲ್ಲಪ್ಪ ಮನ್ಸೂರ. ಸುಮಾರು 3 ಕಿ.ಮಿ ಸೈಕಲ್ ತುಳಿದು ಮೊಸರು ಮಾರುವ ಕಾಯಕ ಮಾಡುತ್ತಾನೆ. ಅದಕ್ಕಿಂತ ಹೆಚ್ಚಾಗಿ ಮುಂಜಾನೆಯ ಎಳೆ ಬಿಸಿಲಿನಲ್ಲಿ ಮಲಗಿದ್ದ ಹಾಸಿಗೆ ಹೊದ್ದು ಮಲಗಿದ್ದ ನನಗೆ ಎಚ್ಚರಿಸುವ ಅಲರಾಂ ಬೆಲ್ ಎಂತಲೇ ಹೇಳಬಹುದು. ಅವನ ಸೈಕಲ್ ಮಾಯಲೋಕದ ಕಿನ್ನರರು ತಮ್ಮ ವಾಹನಗಳಿಗೆ ಶೃಂಗಾರ ಮಾಡಿದಂತೆ ಗಾಲಿಗಳಿಗೆ ರಿಬ್ಬನ್ ಸುತ್ತಿ, ಯುದ್ಧಕ್ಕೆ ಸಿದ್ಧನಾಗಿದ್ದೆನೆ ಎನ್ನುವ ರೀತಿ ಭಾವುಟ ತೋರಿಸಿ, ಗೆಂಡೆಗಳನ್ನು ಗಾಳಿಗೆ ಹಾರಾಡಿಸುತ್ತಾ ಗಂಟೆ ಬಾರಿಸುವ ಗತ್ತು ನನ್ನನ್ನು ಬಾಲ್ಯದ ಪ್ಲಾಶ್‍ಬ್ಯಾಕ್‍ಗೆ ಕರೆದೊಯ್ಯುವಂತೆ ಮಾಡಿತ್ತು. ತೂತು ಬಿದ್ದು ಪುಕ್ಸಟ್ಟೆ ಅಂಡು ಕಾಣಿಸುವ ದೊಗಳೆ ಚಡ್ಡಿ ಹಾಕಿಕೊಳ್ಳುತ್ತಿದ್ದ ವಯಸ್ಸಿನ ಹುಡುಗ ನಾನಾಗಿದ್ದೆ. ‘ಮೊದ ಮೊದಲು ಕೊಂಡ ಹೀರೋ ಸೈಕಲ್’ ಎಂಬತೆ ಪುಟ್ಟ ಸೈಕಲ್ ನಮ್ಮ ಮನೆಯ ಅಂಗಳವನ್ನು ಅಲಂಕರಿಸಿತ್ತು. ಇಡೀ ಊರಿಗೆ ಮೊದಲ ಸೈಕಲ್. ಊರಿನ ಜನ ಬಂದು ಅದನ್ನು ಮೈಸೂರ...

ಬಾ ಮಳೆಯೆ ಬಾ....

ಮೂರುಸಂಜೆ ಸಮಯ. ಭೂಮಿಯನ್ನು ಅಪ್ಪಿ ತಬ್ಬಿಕೊಳ್ಳಲು ಮಳೆ ಹನಿಗಳು ಪೈಪೋಟಿಗೆ ಬಿದ್ದಂತೆ ತಾಮುಂದು ನಿಮುಂದು ಎಂದು ಧರಣಿಯ ಕೆನ್ನೆಗೆ ಮುತ್ತಿಕ್ಕುತ್ತವೆ. ಕಾದು ಸುಡುವ ಹಂಚಾಗಿದ್ದ ಭೂಮಿಗೆ ತಣ್ಣನೆಯ ಬಟ್ಟೆಯನ್ನು ಹೊದಿಸಿದ ಅನುಭವ. ಊರ ತುಂಬ ಪಸರಿಸಿದ ಮಣ್ಣ ಸುವಾಸನೆಗೆ ಪಾರಿಜಾತದ ಘಮವು ಸಪ್ಪೆಯಾಗಿದೆ. ಯಾವ ಸೀಮೆಯ, ಯಾವ ಊರಿನ, ಯಾವ ಕೇರಿಯ ನೀರು ಆವಿಯಾಗಿ, ಹೆಪ್ಪುಗಟ್ಟಿ, ಮೋಡವಾಗಿ ಕರಗಿ ನೀರಾಗಿ ಪರಿಚಯವಿಲ್ಲದ ಜಾಗದಲ್ಲಿ ನಾಚಿಕೆ ಪಟ್ಟುಕೊಳ್ಳದೆ ಜಂಬವಿಲ್ಲದೆ ಸುರಿಯುವ ಅಮೃತಘಳಿಗೆಗೆ ಮಣ್ಣಿನೊಳಗೆ ಅಡಗಿ ಕುಳಿತ ಬೀಜ, ಸಸಿ, ಬೇರು ಬಾಯ್ತೆರೆದು ನಿಂತಿರುತ್ತದೆ ತುದಿಗಾಲ ಮೇಲೆ ಬೊಗಸೆಗಣನ್ನನ್ನು ಅರಳಿಸುತ್ತಾ. ಅಲ್ಲೆಲ್ಲೂ ಅಣಬೆಗಳು ಹಿಡಿಮಳೆಗೆ ಭೂಮಿ ನೆನೆಯುವದನ್ನು ತಪ್ಪಿಸಲು ಕ್ಷಣಮಾತ್ರದಲ್ಲಿ ಹೂವಾಗಿ ಅರಳಿ ನಿಲ್ಲುತ್ತವೆ ಹಬ್ಬದ ಛತ್ರಿ ಚಾಮರ ಕಂಡಂತೆ. ಪುಟುಪುಟು ನೆಗೆಯುತ್ತಾ ಓಡಾಡುವ ಕಪ್ಪೆಮರಿಗಳ ಆಟ ಪುಟ್‍ಬಾಲ್ ಆಟ ನೋಡುವಷ್ಟೇ ಮಜಭೂತವಾಗಿರುತ್ತದೆ. ದೇವರ ಆಟ ಬಲ್ಲವರ್ಯಾರು? ಹಸಿದು ಬರಗೆಟ್ಟ ಗಿಡಗಳು ಹಸಿರಾಗಲೂ ಜಡಿಮಳೆ ಬಸಿರಾಗುವಂತೆ ಮಾಡುತ್ತದೆ. ಎಲೆಯುದರಿ ಮುದುಡಿಕೊಂಡ ಗಿಡಗಳು ಮೆಲ್ಲನೆ ಮೈ ಕೊಡವಿಕೊಂಡು ಹಣ್ಣಾದ ಹಳದಿ ಎಲೆಗಳನ್ನು ಉದುರಿಸಿ ಚಿಗುರೆಲೆಗೆ ಜಾಗ ಮಾಡಿಕೊಡುತ್ತದೆ. ಮೆಲ್ಲಗೆ ಹೂವೊಂದು ಗರ್ಭದಿಂದ ಹೊರಬಂದು ನಗುತ್ತಾ ನಾಚಿ ನೀರಾಗುತ್ತದೆ ದುಂಬಿ ಬಂದು ಕುಳಿತಾಗ. ಕೊಟ್ಟಿಗೆಯಲ್ಲಿ ಧೂಳು ಬಡ...